ಮೂಲ : ಲಾವೋ ತ್ಸು | ಕನ್ನಡಕ್ಕೆ : ಚಿದಂಬರ ನರೇಂದ್ರ
ಕಲಿತದ್ದನ್ನು ಬಸಿದು ಖಾಲಿ ಮಾಡಿದಾಗ
ಎದೆ ತಿಳಿಯಾಗುವುದು.
ಸುತ್ತ ಬದುಕಿಗೆ ಸಾಕ್ಷಿಯಾದಾಗ
ಪ್ರಕ್ಷುಬ್ದತೆ ಹೂವಾಗಿ, ಹಣ್ಣಾಗಿ, ಕಳಚಿಕೊಂಡು
ಬೇರಿಗೆ ಶರಣಾಗುವುದು.
ಜಗತ್ತಿನ ಪ್ರತಿ ಬದುಕು
ಮೂಲಕ್ಕೆ ಮರಳುತ್ತದೆ;
ಮರಳಿದಾಗಲೆ ಅರಳುವುದು ಸಾಧ್ಯ.
ಎಡವಿ ಬಿದ್ದಿದ್ದಾರೆ ಮರಳುವ ಹಾದಿ ಮರೆತವರು;
ನೆನಪಿದ್ದವರು ಮಾತ್ರ
ಸಹಜವಾಗಿ ಸಹಿಷ್ಣುಗಳು, ನಿರಾಸಕ್ತರು,
ಅಜ್ಜಿಯಂತೆ ಅಂತಃಕರುಣಿಗಳು
ರಾಜನಂತೆ ಗಂಭೀರರು.
ಅಪರೂಪದ ತಾವೋದಲ್ಲಿ ಮುಳುಗಿದವರು
ಬದುಕಿನ ಯಾವ ಸವಾಲಿಗೂ ಸಿದ್ಧರು;
ಎದುರಾದರೆ ಸಾವಿಗೂ.