ಮಾಸ್ಟರ್ ಬಾಂಕಿ ಮತ್ತು ಕಳ್ಳ ಶಿಷ್ಯ : Tea time Story

ಜಪಾನ್ ನ ಮಹತ್ವದ ಝೆನ್ ಸಾಧಕರಲ್ಲಿ ಮಾಸ್ಟರ್ ಬಾಂಕಿಯೂ ಒಬ್ಬ. ವರ್ಷಗಟ್ಟಲೆ ಋಷಿಯಂತೆ ಬದುಕಿದ್ದ ಬಾಂಕಿ, ತನಗೆ ಜ್ಞಾನೋದಯವಾದ ಮೇಲೂ , ಝೆನ್ ಸಂಸ್ಥಾನಗಳ ಗೌರವ ಪದವಿಗಳನ್ನು ತಿರಸ್ಕರಿಸಿ, ಅಡುಗೆ ಮನೆಯಲ್ಲಿ ಬಾಣಸಿಗರಿಗೆ ಸಹಾಯ ಮಾಡುತ್ತ, ತನ್ನ ಶಿಷ್ಯರಿಗೆ ಪಾಠ ಹೇಳಿಕೊಂಡು ಸಾಮಾನ್ಯರಂತೆ ಬದುಕಿದ್ದ. ಬಾಂಕಿಯ ಅಪಾರ ಜ್ಞಾನದ ಅರಿವಿದ್ದ ಜನ ದೂರದ ಊರುಗಳಿಂದ ಅವನ ಮಾತು ಕೇಳಲು ಬರುತ್ತಿದ್ದರು.

ಹೀಗಿರುವಾಗ ಒಮ್ಮೆ ಅವನ ಶಿಷ್ಯನೊಬ್ಬ ಕಳ್ಳತನ ಮಾಡುವಾಗ ಉಳಿದ ಶಿಷ್ಯರ ಕೈಗೆ ಸಿಕ್ಕು ಬಿದ್ದ. ಒಬ್ಬ ಯುವ ಸನ್ಯಾಸಿ ಕಳ್ಳ ಶಿಷ್ಯನನ್ನು ಎಳೆದುಕೊಂಡು ಬಂದು ಬಾಂಕಿಯ ಮುಂದೆ ನಿಲ್ಲಿಸಿದ. ಆ ಕಳ್ಳ ಶಿಷ್ಯನನ್ನು ಆಶ್ರಮದಿಂದ ಹೊರಗೆ ಹಾಕಬೇಕು ಎನ್ನುವುದು ಉಳಿದ ಎಲ್ಲರ ಅಪೇಕ್ಷೆಯಾಗಿತ್ತು. ಆದರೆ ಮಾಸ್ಟರ್ ಬಾಂಕಿ ತನ್ನ ಶಿಷ್ಯರ ದೂರನ್ನು ನಿರ್ಲಕ್ಷ ಮಾಡಿದ.

ಕೆಲ ದಿನಗಳ ನಂತರ ಕಳ್ಳ ಶಿಷ್ಯ ಮತ್ತೊಮ್ಮೆ ಕಳ್ಳತನ ಮಾಡುವಾಗ ಸಿಕ್ಕಿಬಿದ್ದ. ಈ ಬಾರಿಯೂ ಬಾಂಕಿ ಕಳ್ಳನನ್ನು ಆಶ್ರಮದಿಂದ ಹೊರಗೆ ಹಾಕಬೇಕು ಎನ್ನುವ ಇತರೆ ಶಿಷ್ಯರ ಫಿರ್ಯಾದನ್ನು ವಜಾ ಮಾಡಿದ.

ಬಾಂಕಿಯ ಈ ವರ್ತನೆಯಿಂದ ಅಸಮಾಧಾನಗೊಂಡ ಶಿಷ್ಯರೆಲ್ಲ ಸೇರಿ ಮಾಸ್ಟರ್ ಬಾಂಕಿಗೊಂದು ಪತ್ರ ಬರೆದರು. ಆ ಕಳ್ಳನನ್ನು ಆಶ್ರಮ ಬಿಟ್ಟು ಹೊರಗೆ ಹಾಕದಿದ್ದರೆ, ತಾವೆಲ್ಲ ಆಶ್ರಮ ತೊರೆದು ಹೋಗುವುದಾಗಿ ಬೆದರಿಕೆ ಹಾಕಿದ್ದರು.

ಪತ್ರ ಓದಿದ ಮಾಸ್ಟರ್ ಬಾಂಕಿ ತನ್ನ ಎಲ್ಲ ಶಿಷ್ಯರನ್ನೂ ಸುತ್ತ ಕೂರಿಸಿಕೊಂಡು ಮಾತನಾಡತೊಡಗಿದ.

“ನೀವೆಲ್ಲ ಜ್ಞಾನಿಗಳಿದ್ದೀರಿ, ನಿಮಗೆ ಸರಿ ತಪ್ಪುಗಳ ಅರಿವಾಗುತ್ತದೆ. ಬೇಕಾದರೆ, ನೀವು ಬೇರೆ ಆಶ್ರಮಕ್ಕೆ ಹೋಗಿ ಅಭ್ಯಾಸ ಮುಂದುವರೆಸಬಹುದು. ಆದರೆ ನೀವು ಯಾರನ್ನ ಕಳ್ಳ ಎಂದು ದೂಷಿಸುತ್ತಿದ್ದೀರೋ ಆ ಪಾಪದ ಮನುಷ್ಯನಿಗೆ ಸರಿ – ತಪ್ಪು ಗಳು ಗೊತ್ತಾಗುವುದಿಲ್ಲ. ನಾನೂ ಅವನನ್ನು ಆಶ್ರಮದಿಂದ ಹೊರಗೆ ಕಳುಹಿಸಿ ಬಿಟ್ಟರೆ, ಅವನಿಗೆ ಬೇರೆ ಯಾರು ಹೇಳಿಕೊಡುತ್ತಾರೆ? ಅವನಿಗೆ ಸರಿ ತಪ್ಪುಗಳ ನಡುವೆ ತಾರತಮ್ಯ ಮಾಡುವುದು ಗೊತ್ತಾಗುವ ತನಕ ನಾನು ಅವನನ್ನು ಬಿಟ್ಟು ಕೊಡುವುದಿಲ್ಲ.”

ಮಾಸ್ಟರ್ ಬಾಂಕಿಯ ಈ ಮಾತುಗಳನ್ನು ಕೇಳುತ್ತಿದ್ದಂತೆಯೇ, ಕಳ್ಳ ಶಿಷ್ಯನ ಕಣ್ಣುಗಳು ತುಂಬಿ ಬಂದವು. ಆ ಕ್ಷಣದಲ್ಲಿಯೇ ಅವನ ಕಳ್ಳತನದ ಚಟ ಕರಗಿ ಹೋಗಿ ಬಿಟ್ಟಿತು.

(ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ)

Unknown's avatar

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

Leave a Reply

This site uses Akismet to reduce spam. Learn how your comment data is processed.