ಒಬ್ಬ ಝೆನ್ ಮಾಸ್ಟರ್ ಗೆ ಇಬ್ಬರು ಶಿಷ್ಯರಿದ್ದರು. ಪ್ರತಿದಿನ ಅವರಿಬ್ಬರೂ ಮಾಸ್ಟರ್ ಮನೆಯ ಮುಂದಿನ ಗಾರ್ಡನ್ ಲ್ಲಿ ‘ವಾಕಿಂಗ್ ಮೆಡಿಟೇಶನ್’ ಮಾಡುತ್ತಿದ್ದರು.
ಝೆನ್ ಸಂಪ್ರದಾಯದಲ್ಲಿ ಪ್ರತಿ ಕ್ರಿಯೆಯೂ ಧ್ಯಾನವೇ. ಸದಾ 24 ಗಂಟೆ ಕುಳಿತು ಧ್ಯಾನ ಮಾಡುವುದು ಕಷ್ಟ. ಕಾಲುಗಳು ಮರಗಟ್ಟುತ್ತವೆ, ರಕ್ತದ ಚಲನೆಗೆ ತೊಂದರೆಯಾಗುತ್ತದೆ. ಆದ್ದರಿಂದ ಝೆನ್ ಸನ್ಯಾಸಿಗಳು ಸ್ವಲ್ಪ ಹೊತ್ತು ಕೂತು ಧ್ಯಾನ ಮಾಡುತ್ತಾರೆ ಆಮೇಲೆ ಸ್ವಲ್ಪ ಹೊತ್ತು ನಡೆದಾಡುತ್ತ ಧ್ಯಾನ ಮಾಡುತ್ತಾರೆ.
ಮಾಸ್ಟರ್ ನ ಈ ಶಿಷ್ಯರಿಬ್ಬರಿಗೂ ಹೊಗೆಸೊಪ್ಪು ಸೇದುವ ಚಟ ಆದರೆ ಅವರಿಬ್ಬರೂ ಮಾಸ್ಟರ್ ಗೆ ಹೆದರಿ ಗಾರ್ಡನ್ ಲ್ಲಿ ಹೊಗೆಸೊಪ್ಪು ಸೇದುತ್ತಿರಲಿಲ್ಲ.
ಒಂದು ದಿನ ಶಿಷ್ಯರಿಬ್ಬರೂ ಪ್ರತ್ಯೇಕವಾಗಿ ಮಾಸ್ಚರ್ ಬಳಿ ಹೋಗಿ ಗಾರ್ಡನ್ ಲ್ಲಿ ವಾಕಿಂಗ್ ಮೆಡಿಟೇಶನ್ ಮಾಡುವಾಗ ಹೊಗೆ ಸೊಪ್ಪು ಸೇದಲು ಮಾಸ್ಟರ್ ನ ಅನುಮತಿ ಕೇಳಲು ನಿರ್ಧರಿಸಿದರು.
ಮರುದಿನ ಒಬ್ಬ ಶಿಷ್ಯ ಗಾರ್ಡನ್ ಲ್ಲಿ ಹೊಗೆಸೊಪ್ಪು ಸೇದುತ್ತ ನಡೆದಾಡುತ್ತಿರುವುದನ್ನು ಕಂಡು ಇನ್ನೊಬ್ಬ ಶಿಷ್ಯನಿಗೆ ಸಿಟ್ಟು ಬಂತು.
“ನಾನೂ ಅನುಮತಿ ಕೇಳಿದೆ ಆದರೆ ಮಾಸ್ಟರ್ ನಿರಾಕರಿಸಿಬಿಟ್ಟರು. ನಿನಗೆ ಹೇಗೆ ಒಪ್ಪಿಗೆ ಕೊಟ್ಟರು? ನಾನು ಈಗಲೇ ಮಾಸ್ಟರ್ ಬಳಿ ಹೋಗುತ್ತೇನೆ” ಅವ ಸಿಟ್ಟಿನಿಂದ ಹೇಳಿದ.
“ನಿಲ್ಲು ನಿಲ್ಲು, ನೀನು ಮಾಸ್ಟರ್ ನ ಏನಂತ ಕೇಳಿದೆ?” ಮೊದಲ ಶಿಷ್ಯ ಕೇಳಿದ.
“ವಾಕಿಂಗ್ ಮೆಡಿಟೇಶನ್ ಮಾಡುವಾಗ ಹೊಗೆಸೊಪ್ಪು ಸೇದಲೆ? ಎಂದು ಕೇಳಿದೆ” ಎರಡನೇಯವ ಉತ್ತರಿಸಿದ.
“ಅದೇ ನೋಡು ನೀನು ಮಾಡಿದ ತಪ್ಪು. ಹಾಗಲ್ಲ ಕೇಳೋದು. ಹೊಗೆಸೊಪ್ಪು ಸೇದುವಾಗ ವಾಕಿಂಗ್ ಮೆಡಿಟೇಶನ್ ಮಾಡಬಹುದಾ ಅಂತ ಕೇಳಬೇಕಿತ್ತು. ನಾನು ಹಾಗೆ ಕೇಳಿದೆ”
ಮೊದಲ ಶಿಷ್ಯ ನಕ್ಕು ಬಿಟ್ಟ.